ಸಿದ್ಧರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಬೇಕೆಂದು ಸ್ವಪಕ್ಷೀಯರಿಂದ ಮುಂದುವರಿದ ಕೂಗು ➤ ಸಿಎಂ ಕುಮಾರಸ್ವಾಮಿ ಗರಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.09. ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ಕಾಂಗ್ರೆಸ್‌ ಸಚಿವರು ಹಾಗೂ ಶಾಸಕರು ಹೇಳಿಕೆ ನೀಡುತ್ತಿರುವ ಬಗ್ಗೆ ಸಿಎಂ ಎಚ್.ಡಿ. ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ ದಿನೇಶ್‌ ಗುಂಡೂರಾವ್‌ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಮುಂದೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಉಪ ಚುನಾವಣೆ ನಡೆಯುತ್ತಿರುವ ಎರಡು ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಬರುವಂತೆ ಆಹ್ವಾನಿಸಲು ಬುಧವಾರ ಸಿಎಂ ಗೃಹ ಕಚೇರಿ ಕೃಷ್ಣಾಗೆ ಬಂದ ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಬಳಿ ಎಚ್‌ಡಿಕೆ ನೇರವಾಗಿಯೇ ಬೇಸರ ಹೊರಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.ಲೋಕಸಭೆ ಚುನಾವಣೆ ಫ‌ಲಿತಾಂಶಕ್ಕೂ ಸಮ್ಮಿಶ್ರ ಸರ್ಕಾರಕ್ಕೂ ಏನು ಸಂಬಂಧ. ಆದರೂ ಕೆಲವು ಸಚಿವರು ಹಾಗೂ ಶಾಸಕರು ಸರ್ಕಾರಕ್ಕೆ ಮುಜುಗರ ಉಂಟಾಗುವ ಹೇಳಿಕೆ ನೀಡುತ್ತಿದ್ದಾರೆ. ಇದು ಆಡಳಿತ ಯಂತ್ರದ ಮೇಲೆ ಪರಿಣಾಮ ಬೀರುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಶಾಸಕರ ಜತೆ ಮಾತನಾಡಿ, ಅಂಥ ಹೇಳಿಕೆ ನೀಡದಂತೆ ತಾಕೀತು ಮಾಡಿ ಎಂದು ಸೂಚಿಸಿದರು ಎಂದು ಹೇಳಲಾಗಿದೆ.ಸಿಎಂ ಸಮಾಧಾನಪಡಿಸಿದ ದಿನೇಶ್‌ ಗುಂಡೂರಾವ್‌, ಪರಮೇಶ್ವರ್‌, ಸಚಿವರು ಹಾಗೂ ಶಾಸಕರ ಜತೆ ನಾವು ಮಾತನಾಡುತ್ತೇವೆ, ನೀವು ಬೇಸರ ಮಾಡಿಕೊಳ್ಳಬೇಡಿ ಎಂದು ಭರವಸೆ ನೀಡಿದರು ಎನ್ನಲಾಗಿದೆ.

ಉಪಚುಣಾವಣಾ ಪ್ರಚಾರಕ್ಕೆ ಆಹ್ವಾನ ಆಹ್ವಾನ: ಸಿಎಂ ಭೇಟಿ ಬಳಿಕ ಮಾತನಾಡಿದ ಡಿಸಿಎಂ ಪರಮೇಶ್ವರ್‌, ಉಪ ಚುನಾವಣೆಗೆ ಪ್ರಚಾರಕ್ಕೆ ಆಗಮಿಸುವಂತೆ ಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದೇವೆ ಎಂದರು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುತ್ತೇನೆ ಎಂದು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ.ಆ ವಿಚಾರ ಇದೀಗ ಅಪ್ರಸ್ತುತ. ಯಾವುದೋ ಅರ್ಥದಲ್ಲಿ ಹೇಳಿದ ಹೇಳಿಕೆ ಬೇರೇನೋ ಸಂಬಂಧ ಕಲ್ಪಿಸಲಾಗುತ್ತದೆ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಹೇಳಿದರು.

ಮೇ 12, 13ಕ್ಕೆ ಪ್ರಚಾರಕ್ಕೆ ಸಿಎಂ: ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಮಾತನಾಡಿ, ಮೇ 12 ಹಾಗೂ 13 ರಂದು ಪ್ರಚಾರಕ್ಕೆ ಮುಖ್ಯಮಂತ್ರಿಯವರು ಬರಲಿದ್ದಾರೆ ಎಂದು ತಿಳಿಸಿದರು. ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ಹೇಳಿಕೆ ನೀಡುತ್ತಿರುವ ಸಚಿವರು ಹಾಗೂ ಶಾಸಕರನ್ನು ಕರೆದು ಕೇಳಲಾಗುವುದು ಎಂದು ಹೇಳಿದರು.ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್‌ ಅವರ ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿ ಟೀಂ ಎಂದು ಹೇಳಿದ್ದಕ್ಕೆ ಕಡಿಮೆ ಸ್ಥಾನ ಬಂತು ಎಂದು ಹೇಳಿರುವುದು ಯಾಕೆ ಎಂಬುದೇ ಅರ್ಥ ಆಗುತ್ತಿಲ್ಲ. ಆಗ ಯಾರಿಗೆ ಎಷ್ಟು ಸ್ಥಾನ ಬಂತು ಎಂಬುದು ಎಲ್ಲರಿಗೂ ಗೊತ್ತು. ಅದನ್ನು ಮತ್ತೆ ಹೇಳುವ   ಅಗತ್ಯ ಇರುವುದಿಲ್ಲ ಎಂದು ಹೇಳಿದರು.

 

 

error: Content is protected !!

Join the Group

Join WhatsApp Group