ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಆರೋಪಿಗಳಿಗೆ ರಾಜಾತಿಥ್ಯ ► ಎಎಸ್ಸೈ ಸೇರಿ ಮೂವರು ಪೊಲೀಸರ ಅಮಾನತು

(ನ್ಯೂಸ್ ಕಡಬ) newskadaba.com ಉಡುಪಿ, ಆ. 22. ಅನಿವಾಸಿ ಭಾರತೀಯ ಬೃಹತ್ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಗಳನ್ನು ಸೋಮವಾರದಂದು ನ್ಯಾಯಾಲಯಕ್ಕೆ ಹಾಜರುಪಡಿಸಲು ಹವಾನಿಯಂತ್ರಿತ ಇನ್ನೋವಾ ಕಾರಿನ ವ್ಯವಸ್ಥೆ ಕಲ್ಪಿಸಿ ರಾಜಾತಿಥ್ಯ ನೀಡಿದ ಕಾರಣಕ್ಕಾಗಿ ಎಎಸ್ಸೈ ಸಹಿತ ಮೂವರು ಪೊಲೀಸ್ ಸಿಬ್ಬಂದಿಗಳನ್ನು ಉಡುಪಿ ಜಿಲ್ಲಾ ಎಸ್ಪಿ ಡಾ. ಸಂಜೀವ ಪಾಟೀಲ್ ಅಮಾನತುಗೊಳಿಸಿದ್ದಾರೆ.

ಆರೋಪಿಗಳಾದ ರಾಜೇಶ್ವರಿ ಶೆಟ್ಟಿ, ನವನೀತ್ ಶೆಟ್ಟಿ ಮತ್ತು ನಿರಂಜನ್ ಭಟ್ ರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಇಂದು ಭದ್ರತಾ ಕರ್ತವ್ಯ ನಿರ್ವಹಿಸಿದ ಉಡುಪಿ ಸಶಸ್ತ್ರ ಮೀಸಲು ಪಡೆಯ ಸಹಾಯಕ ಉಪನಿರೀಕ್ಷಕ ಸುಧಾಕರ್, ಮಣಿಪಾಲ ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿ ರೇಣುಕಾ ಹಾಗೂ ಕಾನ್‌ಸ್ಟೇಬಲ್ ಸಲ್ಮಾನ್ ಖಾನ್ ಅವರನ್ನು ಅಮಾನುತುಗೊಳಿಸಲಾಗಿದೆ. ಮಂಗಳೂರು ಜೈಲಿನಲ್ಲಿದ್ದ ಮೂವರು ಆರೋಪಿಗಳನ್ನು ಪೊಲೀಸರು ಇಂದು ವಿಚಾರಣೆಗಾಗಿ ಉಡುಪಿ ನ್ಯಾಯಾಲಯಕ್ಕೆ ಸರಕಾರಿ ವಾಹನ ಅಥವಾ ಬಸ್‌ಗಳಲ್ಲಿ ಕರೆದುಕೊಂಡು ಬರಬೇಕಿತ್ತು. ಆದರೆ ಅದರ ಬದಲು ಪೊಲೀಸರು ಆರೋಪಿಗಳೇ ಗೊತ್ತು ಮಾಡಿದ ಖಾಸಗಿ ಹವಾನಿಯಂತ್ರಿತ ಇನೋವಾ ಕಾರಿನಲ್ಲಿ ಕರೆದುಕೊಂಡು ಬಂದಿದ್ದರು. ಪೊಲೀಸರು ಕೂಡ ಆರೋಪಿಗಳ ಜೊತೆ ಇದೇ ವಾಹನದಲ್ಲಿ ಬಂದಿದ್ದರು. ಪೊಲೀಸರು ಆರೋಪಿಗಳನ್ನು ನ್ಯಾಯಾಲಯದ ಎದುರಿನಿಂದ ಕರೆದು ಕೊಂಡು ಬರುವ ಬದಲು ಹಿಂದಿನಿಂದ ಕರೆದುಕೊಂಡು ಬಂದಿದ್ದರು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ವಾಪಾಸ್ ಕರೆದುಕೊಂಡು ಹೋಗುವಾಗ ಬೇರೆ ಪ್ರಕರಣದ ವರದಿ ಮಾಡಲು ನ್ಯಾಯಾಲಯಕ್ಕೆ ಆಗಮಿಸಿದ್ದ ಮಾಧ್ಯಮದವರಿಗೆ ಈ ದೃಶ್ಯ ಕಂಡುಬಂದಿತು. ಕೊಲೆ ಆರೋಪಿಗಳಿಗೆ ಈ ರೀತಿ ರಾಜಾತಿಥ್ಯ ನೀಡಿರುವ ವಿಚಾರ ಕ್ಷಣಾರ್ಧದಲ್ಲಿ ಮಾಧ್ಯಮಗಳಲ್ಲಿ ಬಿತ್ತರಗೊಂಡಿತು. ಈ ಹಿನ್ನೆಲೆಯಲ್ಲಿ ಉಡುಪಿ ಎಸ್ಪಿ ಡಾ. ಸಂಜೀವ ಪಾಟೀಲ್ ಪ್ರಕರಣದ ವಿಚಾರಣೆಗೆ ಆದೇಶ ನೀಡಿದರು. ಅದರಂತೆ ಉಡುಪಿ ಡಿವೈಎಸ್ಪಿ ಕುಮಾರ ಸ್ವಾಮಿ ಪ್ರಕರಣದ ಪ್ರಾಥಮಿಕ ತನಿಖೆಯನ್ನು ನಡೆಸಿ ಎಸ್ಪಿಯವರಿಗೆ ವರದಿ ನೀಡಿದ ಮೇರೆಗೆ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಮೂವರು ಆರೋಪಿಗಳ ಭದ್ರತಾ ಕರ್ತವ್ಯದಲ್ಲಿ ಪೊಲೀಸರು ಘೋರ ನಿರ್ಲಕ್ಷ್ಯ ವಹಿಸಿರುವುದು ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ಇವರನ್ನು ಮುಂದಿನ ಇಲಾಖಾ ತನಿಖೆ ಪೂರ್ಣಗೊಳ್ಳುವವರೆಗೆ ಅಮಾನತುಗೊಳಿಸಲಾಗಿದೆ’ ಎಂದು ಎಸ್ಪಿ ಡಾ.ಸಂಜೀವ ಪಾಟೀಲ್ ಅಮಾನತು ಆದೇಶದಲ್ಲಿ ತಿಳಿಸಿದ್ದಾರೆ.

error: Content is protected !!

Join the Group

Join WhatsApp Group