(ನ್ಯೂಸ್ ಕಡಬ) newskadaba.com.ಶ್ರೀನಗರ, ಜೂ.11– ಕಣಿವೆ ಪ್ರಾಂತ್ಯ ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ಸದೆಬಡೆಯುವ ಕಾರ್ಯಾಚರಣೆಯನ್ನು ಭಾರತೀಯ ಭದ್ರತಾ ಪಡೆಗಳು ಮತ್ತಷ್ಟು ತೀವ್ರಗೊಳಿಸಿವೆ. ಜಮ್ಮು ಮತ್ತು ಕಾಶ್ಮೀರದ ಬದ್ಗಾಂ ಜಿಲ್ಲೆಯ ಪಠಾಣ್ಪುರ್ನಲ್ಲಿ ಇಂದು ಬೆಳಗ್ಗೆ ಭದ್ರತಾಪಡೆಗಳೊಂದಿಗೆ ನಡೆದ ಭೀಕರ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರಗಾಮಿಗಳು ಹತರಾಗಿದ್ದು, ವಿಧ್ವಂಸಕ ಕೃತ್ಯ ಯತ್ನ ವಿಫಲಗೊಂಡಂತಾಗಿದೆ.

ಹತರಾದ ಉಗ್ರರಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಶೋಪಿಯಾನ್ ಜಿಲ್ಲೆಯಲ್ಲಿ ನಿನ್ನೆ ನಸುಕಿನಲ್ಲಿ ಭದ್ರತಾಪಡೆಗಳೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಕಮಾಂಡರ್ ಸೇರಿದಂತೆ ಐವರು ಉಗ್ರಗಾಮಿಗಳು ಹತರಾಗಿದ್ದರು. ಇದರೊಂದಿಗೆ ಕಳೆದ ನಾಲ್ಕು ದಿನಗಳಲ್ಲಿ ಒಟ್ಟು 15 ಭಯೋತ್ಪಾದಕರನ್ನು ಯೋಧರು ಹೊಡೆದುರುಳಿಸಿದ್ದು, ಭಾರೀ ವಿಧ್ವಂಸಕ ಕೃತ್ಯಗಳನ್ನು ನಿಷ್ಕ್ರಿಯಗೊಳಿಸಿದ್ದಾರೆ.

ಸೋಪಿಯಾನ್ ಜಿಲ್ಲೆಯ ಸುಗೂ ಗ್ರಾಮದ ಮನೆಯೊಂದರಲ್ಲಿ ಉಗ್ರಗಾಮಿಗಳು ಅವಿತಿಟ್ಟುಕೊಂಡು ದಾಳಿಗೆ ಸಜ್ಜಾಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭಾರತೀಯ ಸೇನೆ, ಸಿಆರ್ಪಿಎಫ್ ಮತ್ತು ಪೊಲೀಸರು ನಿನ್ನೆ ರಾತ್ರಿಯಿಂದಲೇ ಆ ಪ್ರದೇಶವನ್ನು ಸುತ್ತುವರಿದು ಬೇಟೆ ಕಾರ್ಯಾಚರಣೆ ನಡೆಸುತ್ತಿದ್ದರು.ಇದೇ ಸಂದರ್ಭದಲ್ಲಿ ಉಗ್ರರು ಯೋಧರ ಮೇಲೆ ಗುಂಡು ಹಾರಿಸಿದಾಗ ಭದ್ರತಾಪಡೆಗಳೂ ಪ್ರತಿದಾಳಿ ನಡೆಸಿದವು. ಆಗ ನಡೆದ ಸುದೀರ್ಘ ಎನ್ಕೌಂಟರ್ನಲ್ಲಿ ಮೂವರು ಉಗ್ರರು ಹತರಾದರುಇಂದು ನಸುಕಿನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇನ್ನೂ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದ್ದು, ಸತ್ತವರ ಸಂಖ್ಯೆ 15ಕ್ಕೇರಿದೆ.











