ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿಬಾಂಬ್ ಕರೆ ಮಾಡಿದ್ದ ಆರೋಪ ➤ ಪ್ರಚಾರಗಿಟ್ಟಿಸಲು ಹೋಗಿ ಜೈಲು ಸೇರಿದ ಭೂಪ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,21:  ಕಳೆದ ಬುಧವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದ ಆರೋಪಿ ವಸಂತ ಕೃಷ್ಣ ಶೇರಿಗಾರ್ (33) ಎಂಬಾತನನ್ನು ಬಂಧಿಸಲಾಗಿದ್ದು, ಪ್ರಚಾರ ಪಡೆಯುವ ಉದ್ದೇಶದಿಂದ ಆತ ಈ ಕೃತ್ಯ ಎಸಗಿರುವುದಾಗಿ ತನಿಖೆಯ ವೇಳೆ ತಿಳಿದು ಬಂದಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ತಿಳಿಸಿದ್ದಾರೆ.

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಮಾಡಿದ ವ್ಯಕ್ತಿ ಕೇವಲ ಪ್ರಚಾರಕ್ಕಾಗಿ ತಾನು ಈ ಕೃತ್ಯ ಎಸಗಿರುವುದಾಗಿ ಪೋಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ. ತನ್ನ ಪ್ರಚಾರದ ಹುಚ್ಚಿಗೆ ಈತ ಇದೀಗ ಜೈಲಿನ ಕಂಬಿ ಎಣಿಸಲು ಆರಂಭಿಸಿದ್ದಾನೆ. ಆಗಸ್ಟ್ 19 ರಂದು ಮಧ್ಯಾಹ್ನ ಸುಮಾರು 1 ಗಂಟೆಯ ವೇಳೆಗೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮಾಜಿ ನಿರ್ದೇಶಕರಾದ ವಾಸುದೇವ್ ರಾವ್ ಅವರಿಗೆ ಕರೆ ಮಾಡಿ ,ತಾನು ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟಿರುವುದಾಗಿ ಮಾಹಿತಿ ನೀಡುತ್ತಾನೆ.

ತಕ್ಷಣವೇ ಪ್ರಕರಣದ ಗಂಭೀರತೆಯನ್ನು ಮನವರಿಕೆ ಮಾಡಿಕೊಂಡ ಮಾಜಿ ನಿರ್ದೇಶಕರು ಈ ವಿಚಾರವನ್ನು ಮಂಗಳೂರು ವಿಮಾನ ನಿಲ್ದಾಣದ ನಿರ್ದೇಶಕರ ಗಮನಕ್ಕೆ ತರುತ್ತಾರೆ.ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ ವಹಿಸಿ , ಬಾಂಬ್ ಕರೆಯ ಜಾಡನ್ನು ಪತ್ತೆ ಹಚ್ಚಲು ಪೋಲೀಸರು ಆರಂಭಿಸುತ್ತಾರೆ.ಮೊಬೈಲ್ ನಂಬರ್ ಆಧಾರದಲ್ಲಿ ತನಿಖೆಗೆ ಇಳಿದ ಮಂಗಳೂರು ನಗರ, ಉಡುಪಿ ಜಿಲ್ಲಾ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಅದೇ ದಿನ ಆರೋಪಿಯನ್ನು ಬಂಧಿಸಿದ್ದರು.ಕಾರ್ಕಳ ತಾಲೂಕಿನ ಮುದ್ರಾಡಿಯ ನಿವಾಸಿಯಾಗಿರುವ ಆರೋಪಿಯ ವಿರುದ್ಧ ಜಾಮೀನುರಹಿತ ಪ್ರಕರಣವನ್ನು ದಾಖಲಿಸಲಾಗಿದೆ.

error: Content is protected !!

Join the Group

Join WhatsApp Group