ಮಂಗಳೂರು: ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 20. ಜಿಲ್ಲೆಯಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪ್ರತಿಶತ ನೂರರಷ್ಟು ಪೂರ್ಣಗೊಳಿಸಬೇಕು ಎಂದು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ   ಗುರುಮೂರ್ತಿರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಇಂದು ನಗರದ ಸರ್ಕ್ಯೂಟ್ ಹೌಸ್‍ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಕೈಗೊಂಡಿರುವ ಕಾಮಗಾರಿಗಳ  ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. ಜಿಲ್ಲೆಯಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ  ವತಿಯಿಂದ ಈಗಾಗಲೇ ಅನುಮೋದನೆಗೊಂಡ ಕಾಮಗಾರಿಗಳನ್ನು ಜನವರಿ ಮಾಹೆ ಅಂತ್ಯದೊಳಗೆ ಪೂರ್ಣಗೊಳಿಸಬೇಕು. ಪ್ರಸ್ತುತ ಅನುಮೋದನೆಗೆ ಸಲ್ಲಿಸಿರುವ 80 ಕಾಮಗಾರಿಗಳನ್ನು ಮಾರ್ಚ್ ಎರಡನೇ ವಾರದೊಳಗಾಗಿ ಪೂರ್ಣಗೊಳಿಸಬೇಕು ಎಂದರು.


ಜಿಲ್ಲೆಯಲ್ಲಿ ಒಟ್ಟಾರೆ 94 ಕಾಮಗಾರಿಗಳನ್ನು 8.07 ಕೋಟಿ ರೂ. ಗಳ ಮೊತ್ತದಲ್ಲಿ ಕೈಗೊಳ್ಳಲಾಗಿದೆ. ಈ ಆರ್ಥಿಕ ವರ್ಷದಲ್ಲಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಅವರು ಬಿಡುಗಡೆ ಮಾಡಿದ ಅನುದಾನವನ್ನು ಯಾವುದೇ ಕಾರಣಕ್ಕೂ  ವ್ಯಪಗತವಾಗದಂತೆ ಎಚ್ಚರ ವಹಿಸಬೇಕು ಎಂದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಮೀನಾಕ್ಷಿ ಶಾಂತಿಗೋಡು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ, ಮಂಡಳಿ ಸದಸ್ಯರಾದ ರಾಮ ಅಮಿನ್ ಪಚ್ಚಾಡಿ ಹಾಗೂ ಮಂಡಳಿಯ ಕಾರ್ಯದರ್ಶಿ ಕೆ.ಎಸ್. ಮಣಿ,  ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ, ಕರ್ನಾಟಕ ರೂರಲ್ ಇನ್ಫಾಸ್ಟ್ರಕ್ಚರ್ ಡೆವಲಪ್‍ ಮೆಂಟ್ ಲಿಮಿಟೆಡ್, ಮಹಾನಗರ ಪಾಲಿಕೆ ಅಭಿಯಂತರುಗಳು  ಮಂಗಳೂರು ಹಾಗೂ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ  ಹಾಗೂ ಜಿಲ್ಲಾ ಮಟ್ಟ ಅನುಷ್ಠಾನಾಧಿಕಾರಿಗಳು  ಉಪಸ್ಥಿತರಿದ್ದರು.

Scroll to Top