ಸಿವಿಲ್ ನ್ಯಾಯಾಧೀಶೆಯಾಗಿ ಧರ್ಮಸ್ಥಳದ ಚೇತನಾ ಆಯ್ಕೆ



(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 26.‌ಕರ್ನಾಟಕ ಉಚ್ಚ ನ್ಯಾಯಾಲಯದ ‌2020ನೇ ಸಿವಿಲ್ ಜಡ್ಜ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ 2021 ಫೆ. 25ರಂದು ಹೊರಡಿಸಿದ ಅಧಿಸೂಚನೆಯಂತೆ ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಧರ್ಮಸ್ಥಳದ ಚೇತನಾ‌ ಎಂಬವರು ಆಯ್ಕೆಯಾಗಿದ್ದಾರೆ.







ಧರ್ಮಸ್ಥಳದ ನಾರ್ಯ ಎಂಬ ಪುಟ್ಟ ಕುಟುಂಬದಲ್ಲಿ ಜನಿಸಿದ ಇವರು ರಾಮಣ್ಣ ಪೂಜಾರಿ ಹಾಗೂ ಸೀತಾ ದಂಪತಿಯ ಎರಡನೇ ಪುತ್ರಿ.‌ 1ರಿಂದ 6ನೇ ತರಗತಿವರೆಗೆ ಪ್ರಾಥಮಿಕ ಶಿಕ್ಷಣವನ್ನು ಉಪ್ಪಿನಂಗಡಿ ಸಮೀಪದ ಪೆರ್ನೆ ಕನ್ನಡ ಮಾಧ್ಯಮ ಶಾಲೆ, ಕನ್ಯಾಡಿ ಸರಕಾರಿ ಶಾಲೆಯಲ್ಲಿ ಏಳನೇ ತರಗತಿ ಪೂರ್ಣಗೊಳಿಸಿ, ಧರ್ಮಸ್ಥಳ ಶ್ರೀ.ಧ.ಮಂ. ಸೆಕೆಂಡರಿ ಶಾಲೆಯಲ್ಲಿ ಪ್ರೌಢ ಶಿಕ್ಷಣ, ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ.ಪೂ.ಶಿಕ್ಷಣವನ್ನು ಪೂರ್ತೀಕರಿಸಿದ್ದಾರೆ.






2016ರಲ್ಲಿ ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನಲ್ಲಿ ತಮ್ಮ ಕಾನೂನು ವಿದ್ಯಾಭ್ಯಾಸ ಪೂರ್ಣಗೊಳಿಸಿ ಬೆಳ್ತಂಗಡಿಯ ವಕೀಲರಾದ ಕೇಶವ ಪಿ. ಬೆಳಾಲು ಅವರ‌ಲ್ಲಿ ವಕೀಲ ವೃತ್ತಿ ಪ್ರಾರಂಭಿಸಿದ್ದರು. ಬಳಿಕ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ಬಿ. ಎ. ಪಾಟೀಲ್ ಅವರ ಕ್ಲರ್ಕ್ ರಿಸರ್ಚ್ ಅಸಿಸ್ಟೆಂಟ್ ಆಗಿ ಸುಮಾರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿ, ಒಂದು ವರ್ಷದಿಂದ ನ್ಯಾಯವಾದಿ ಶಿವಪ್ರಸಾದ್ ಶಾಂತನಗೌಡರ್ ಕಚೇರಿಯಲ್ಲಿ ಕಿರಿಯ ವಕೀಲರಾಗಿ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ವೃತ್ತಿ ಮುಂದುವರಿಸಿದ್ದರು. ಇದೀಗ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ‌ ಸಿವಿಲ್‌ ನ್ಯಾಯಾಧೀಶ ಹುದ್ದೆಗೆ ಆಯ್ಕೆಯಾಗಿದ್ದಾರೆ.

error: Content is protected !!
Scroll to Top