(ನ್ಯೂಸ್ ಕಡಬ) newskadaba.com. ಮೈಸೂರು, ಮಾ. 06. ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ಯಾವುದೇ ಸುದ್ದಿಯನ್ನು ಪ್ರಸಾರ ಮಾಡಬಾರದು ಎಂದು ನ್ಯಾಯಾಲಯದ ಮೊರೆ ಹೋಗಿರುವ ಸಚಿವರನ್ನು ಸಂಪುಟದಿಂದ ವಜಾ ಮಾಡಿ ಎಂದು ಶಾಸಕ ಸಾ.ರಾ.ಮಹೇಶ್ ಒತ್ತಾಯಿಸಿದ್ದಾರೆ.

ಇಲ್ಲಿನ ಗಾಂಧಿ ವೃತ್ತದಲ್ಲಿ ಇಂದು ಜೆಡಿಎಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಜ್ಯ ಮತ್ತು ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿ ಹಾಗೂ ಪೆಟ್ರೋಲ್, ಡೀಸೆಲ್ ಮತ್ತು ಅನಿಲ ಬೆಲೆ ಏರಿಕೆ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು. ನ್ಯಾಯಾಲಯದ ಮೊರೆ ಹೋಗಿರುವವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಸದನದಲ್ಲಿಯೂ ಒತ್ತಾಯಿಸುತ್ತೇನೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕೆ? ಇವರುಗಳು ಅರ್ಜಿ ಹಾಕಿರುವುದು ನಾವೆಲ್ಲರೂ ತಲೆತಗ್ಗಿಸುವ ವಿಚಾರ. ಇದೆಲ್ಲದರ ಹಿಂದೆ ಒಂದು ಷಡ್ಯಂತ್ರ ಇದೆ. ಅದು ಹೊರಗೆ ಬರಬೇಕು. ಬಾಂಬೆಯಲ್ಲಿ ಅಷ್ಟೊಂದು ಟೈಟ್ ಸೆಕ್ಯೂರಿಟಿ ಇಟ್ಟುಕೊಂಡವರು ಯಾಕೆ ಅರ್ಜಿ ಹಾಕಿದ್ದಾರೆ ಎಂದು ಈ ಸಂದರ್ಭದಲ್ಲಿ ಪ್ರಶ್ನಿಸಿದರು.










