ಕೊರೋನಾ ಭೀತಿಯಿಂದ ಆತ್ಮಹತ್ಯೆಗೈದ ದಂಪತಿಯ ವರದಿ ನೆಗೆಟಿವ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ.18. ಕೊರೋನಾ ಸೋಂಕಿನ ಭೀತಿಯಿಂದ ಡೆತ್‌ನೋಟ್‌ ಬರೆದಿಟ್ಟು ಅಪಾರ್ಟ್‌ಮೆಂಟ್‌ನಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ ದಂಪತಿಯ ಮರಣೋತ್ತರ ಪರೀಕ್ಷೆಗೆ ಮುನ್ನ ನಡೆಸಿದ ಕೋವಿಡ್ ಟೆಸ್ಟ್‌ನಲ್ಲಿ ಕೊರೋನಾ ನಗೆಟಿವ್ ವರದಿ ಬಂದಿದೆ.

ಮೂಲತಃ ಪಡುಬಿದ್ರಿ ನಿವಾಸಿಗಳಾದ ಆರ್ಯ ಸುವರ್ಣ(45) ಮತ್ತು ಗುಣ ಸುವರ್ಣ(35) ಎಂಬವರು ನಗರದ ಹೊರವಲಯದ ಬೈಕಂಪಾಡಿ ಸಮೀಪದ ಚಿತ್ರಾಪುರದ ಅಪಾರ್ಟ್‌ಮೆಂಟ್ ಒಂದರಲ್ಲಿ ಕೊರೋನಾ ಜೊತೆಗೆ ಬ್ಲ್ಯಾಕ್ ಫಂಗಸ್ ಭೀತಿಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದರು‌. ಡೆತ್ ನೋಟ್ ಬರೆದಿರುವ ಗಯಣ ಸುವರ್ಣ ‘ನಾನು 14ನೇ ವಯಸ್ಸಿನಿಂದಲೇ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದೇನೆ. 2000ನೇ ಇಸವಿಯಲ್ಲಿ ನಮ್ಮ ಮದುವೆಯಾಗಿದೆ. 2001ರಲ್ಲಿ ಗರ್ಭಿಣಿಯಾಗಿದ್ದಾಗ ನನಗೆ ಸಕ್ಕರೆ ಕಾಯಿಲೆ ಬಾಧಿಸಿತು. ಸಿಝೇರಿಯನ್ ಮಾಡಿಸಿ ಗಂಡು ಮಗುವಾದರೂ ಅದನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. 2005ರಲ್ಲಿ ಮತ್ತೆ ಗರ್ಭಿಣಿಯಾಗಿದ್ದೆ. ಆದರೂ ಮಾತ್ರೆಯಿಂದ ವ್ಯತಿರಿಕ್ತ ಪರಿಣಾಮವಾಗುತ್ತಿದ್ದಂತೆ ಮತ್ತೆ ಸಮಸ್ಯೆ ಎದುರಾಯಿತು. ಯಾವುದೇ ಮಾತ್ರೆ ತೆಗೆದುಕೊಳ್ಳಲು ಆಗುತ್ತಿರಲಿಲ್ಲ. ಅಂದಿನಿಂದ ಪ್ರತಿನಿತ್ಯ ಎರಡು ಇನ್ಸುಲಿನ್ ತೆಗೆದುಕೊಳ್ಳುತ್ತಿದ್ದೇನೆ. ನನ್ನ ಮಧುಮೇಹ (ಷುಗರ್) ಕಂಟ್ರೋಲ್‌ಗೆ ಬರುತ್ತಿಲ್ಲ. ಈ ಕಾರಣದಿಂದ 2020ರ ಬಳಿಕ ಕೋವಿಡ್ ಬಂದ ಬಳಿಕ ನಾವೆಲ್ಲ ತುಂಬಾ ಜಾಗರೂಕತೆ ತೆಗೆದುಕೊಂಡಿದ್ದೆವು. ಆದರೆ ಸುಮಾರು 10ದಿನಗಳಿಂದ ಕೋವಿಡ್ ನನ್ನನ್ನು ಬಾಧಿಸಿದ್ದು, ಅದು ವಿಕೋಪಕ್ಕೆ ಹೋಗಿ ಬ್ಲಾಕ್ ಫಂಗಸ್ ಭಯ ಕಾಡಿದೆ. ಗಂಡನಿಗೂ 3 ದಿನದಿಂದ ಕೋವಿಡ್ ಲಕ್ಷಣಗಳು ಕಂಡು ಬರುತ್ತಿದೆ. ಈ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ. ನನ್ನ ತಂದೆ, ತಾಯಿ ಹಾಗೂ ತಮ್ಮನಿಗೂ ಕೋವಿಡ್ ಸೋಂಕು ತಗುಲಿದ್ದು, ಚೇತರಿಸಿಕೊಂಡಿದ್ದಾರೆ. ಆದ್ದರಿಂದ ಅವರಿಗೆ ನಮ್ಮ ಅಂತ್ಯಕ್ರಿಯೆಯ ತೊಂದರೆಯನ್ನು ಕೊಡಬಾರದು. ನನಗೆ 2 ಬಾರಿ ಸಿಝೇರಿಯನ್ ಆಗಿ ಮಕ್ಕಳ ಸಮಸ್ಯೆಯಾದರೂ ಎಲ್ಲಿ ಹೋದರೂ ಮಕ್ಕಳ ಬಗ್ಗೆಯೇ ಕೇಳುತ್ತಿದ್ದಾರೆ. ಅದಕ್ಕಾಗಿ ನಾನು ಹೆಚ್ಚು ಯಾರ ಜತೆನೂ ಬೆರೆಯುತ್ತಿರಲಿಲ್ಲ. ಹಿಂದೂ ಸಂಘಟನೆಯ ಶರಣ್ ಪಂಪ್‌ವೆಲ್ ಮತ್ತು ಸತ್ಯಜಿತ್ ಸುರತ್ಕಲ್ ಅವರಲ್ಲಿ ವಿನಂತಿ ಮಾಡುವುದೇನೆಂದರೆ ನಮ್ಮನ್ನು ಹಿಂದೂ ಸಂಪ್ರದಾಯ ಪ್ರಕಾರ ಅಂತ್ಯಸಂಸ್ಕಾರ ನಡೆಸಿ. ಅಂತ್ಯಕ್ರಿಯೆಗೆಂದು 1ಲಕ್ಷ ರೂ. ಇಟ್ಟಿದ್ದೇವೆ. ನಮ್ಮ ಮನೆಯಲ್ಲಿರುವ ವಸ್ತುಗಳನ್ನು ಬಡವರಿಗೆ ನೀಡಿ. ಈ ಮನೆಯ ಮಾಲೀಕರಲ್ಲೂ ಕ್ಷಮೆ ಕೇಳುತ್ತೇವೆ’ ಎಂದು ಬರೆದಿದ್ದಾರೆ.

ಆತ್ಮಹತ್ಯೆಗೆ ಮುನ್ನ ಆರ್ಯ ಸುವರ್ಣ ಅವರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್‌ಗೆ ವಾಯ್ಸ್ ಮೆಸೇಜ್ ಕಳಿಸಿದ್ದು, ‘ದಂಪತಿಗಳಾದ ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ’ ಎಂದು ಹೇಳಿದ್ದರು. ಇದಕ್ಕೆ ಕಮಿಷನರ್ ಕೂಡಲೇ ಪ್ರತಿಕ್ರಿಯೆ ನೀಡಿ ‘ಆತ್ಮಹತ್ಯೆಯಂತ ದುಸ್ಸಾಹಸ ಮಾಡಬೇಡಿ. ನಿಮ್ಮ ಏನೇ ಕಷ್ಟವಿದ್ದರೂ ನಾನು ಸ್ಪಂದಿಸುತ್ತೇನೆ. ದಯವಿಟ್ಟು ಆತ್ಮಹತ್ಯೆ ಮಾಡಬೇಡಿ’ ಎಂದು ವಿನಂತಿ ಮಾಡಿ ಕೂಡಲೇ ಎಲ್ಲ ಪೊಲೀಸ್ ಠಾಣೆಗೆ ಮಾಹಿತಿ ರವಾನಿಸಿದ್ದಾರೆ. ದಂಪತಿಯ ಮಾಹಿತಿ ಪಡೆದ ಸುರತ್ಕಲ್ ಪೊಲೀಸರು ಅಪಾರ್ಟ್‌ಮೆಂಟ್‌ಗೆ ಹೋದಾಗ ದಂಪತಿ ಆತ್ಮಹತ್ಯೆಗೈದಿರುವುದು ಕಂಡು ಬಂದಿತ್ತು.

ಅಪಾರ್ಟ್‌ಮೆಂಟ್ ನಿಂದ ದಂಪತಿಯ ಮೃತದೇಹವನ್ನು ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿ ಪೋಸ್ಟ್ ಮಾರ್ಟಮ್​ಗೂ ಮುನ್ನ ನಡೆಸಿದ ಕೋವಿಡ್ ಟೆಸ್ಟ್​ನಲ್ಲಿ ನೆಗೆಟಿವ್ ರಿಪೋರ್ಟ್ ದಾಖಲಾಗಿದೆ. ಕೋವಿಡ್ ಪಾಸಿಟಿವ್ ಆಗಿದೆ ಎಂಬ ಅತಂಕದಲ್ಲಿ ದಂಪತಿ ನೇಣಿಗೆ ಶರಣಾಗಿದ್ದರು.

 

 

 

 

error: Content is protected !!

Join the Group

Join WhatsApp Group