(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ.23. ಉತ್ತರ ಭಾರತದಲ್ಲಿ ಉಗ್ರ ಚಟುವಟಿಕೆಯಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಉಪ್ಪಿನಂಗಡಿಯ ಮೆಕ್ಯಾನಿಕ್ ಓರ್ವರನ್ನು ಬಂಧಿಸಲಾಗಿದೆ ಎಂದು ಕಳೆದ ಕೆಲವು ದಿನಗಳಿಂದ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವರದಿಯು ಸುಳ್ಳು ಸುದ್ದಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಋಷಿಕೇಶ್ ಸೋನಾವಣೆ ತಿಳಿಸಿದ್ದಾರೆ.

ಕಳೆದೆರಡು ತಿಂಗಳ ಹಿಂದೆ ಉಪ್ಪಿನಂಗಡಿಯ ನೆಕ್ಕಿಲಾಡಿಯ ಮೆಕ್ಯಾನಿಕ್ ಮೊಹಮ್ಮದ್ ರಫೀಕ್ ಖಾನ್ ನಾಪತ್ತೆಯಾಗಿದ್ದು, ಈ ಬಗ್ಗೆ ಆತನ ಪತ್ನಿ ಉಪ್ಪಿನಂಗಡಿ ಠಾಣೆಗೆ ದೂರು ನೀಡಿದ್ದರು. ಈ ನಡುವೆ ಮಹಮ್ಮದ್ ರಫೀಕ್ ಖಾನ್ ಉತ್ತರ ಭಾರತದಲ್ಲಿ ಬಂಧಿತರಾದ ಉಗ್ರಗಾಮಿಗಳೊಂದಿಗೆ ಸಂಪರ್ಕ ಹೊಂದಿರುತ್ತಾರೆಂದು ಸ್ಥಳೀಯ ಪತ್ರಿಕೆ, ಮಾದ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿತ್ತು. ಪ್ರಕರಣವನ್ನು ಕೂಲಂಕುಷವಾಗಿ ಪರಿಶೀಲಿಸಿದ ಪೊಲೀಸ್ ಇಲಾಖೆಯು ಮಾಧ್ಯಮಗಳಲ್ಲಿ ಪ್ರಸಾರವಾದ ವರದಿಯು ಸತ್ಯಕ್ಕೆ ದೂರವಾದ ಸಂಗತಿಯಾಗಿರುತ್ತದೆ. ರಫೀಕ್ ಖಾನ್ ಒಂದು ತಿಂಗಳಲ್ಲಿ ಊರಿಗೆ ಮರಳಲಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










