(ನ್ಯೂಸ್ ಕಡಬ) newskadaba.com ಮಂಗಳೂರು, ಜ. 19. ಇಲ್ಲಿನ ಪಚ್ಚನಾಡಿ ಭೂಭರ್ತಿ ಘಟಕದಲ್ಲಿ ತುಂಬಾ ದಿನಗಳಿಂದ ಬಾಕಿಯಾದ ತ್ಯಾಜ್ಯವನ್ನು ವಿಲೇವಾರಿ ಮಾಡುವಲ್ಲಿ ತಡ ಮಾಡುತ್ತಿರುವ ಮಂಗಳೂರು ಮಹಾನಗರ ಪಾಲಿಕೆಯ ವರ್ತನೆಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದಲ್ಲದೇ, ವಿಲೇವಾರಿ ಕಾರ್ಯವನ್ನು ತಕ್ಷಣ ಆರಂಭಿಸದಿದ್ದಲ್ಲಿ ಪಾಲಿಕೆ ಆಯುಕ್ತರು ಮುಂದಿನ ವಿಚಾರಣೆಗೆ ಖುದ್ದು ಹಾಜರಾಗಬೇಕು ಎಂದು ನಿರ್ದೇಶನ ನೀಡಿದೆ.

ಮಂಗಳೂರಿನ ಪಚ್ಚನಾಡಿ ಘನತ್ಯಾಜ್ಯ ಭೂಭರ್ತಿ ಘಟಕದ ಅನಾಹುತಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆಯನ್ನಜ ನೀಡಿದೆ. ವಿಚಾರಣೆ ವೇಳೆ ಮಂಗಳೂರು ನಗರಪಾಲಿಕೆ ಪರ ಎಎಜಿ ಧ್ಯಾನ್ ಚಿನ್ನಪ್ಪ ವಾದ ಮಂಡಿಸಿ, ಘಟಕದಲ್ಲಿ ಬಹಳ ದಿನಗಳಿಂದ ಉಳಿದಿರುವ ತ್ಯಾಜ್ಯ ವಿಲೇವಾರಿಗೆ ಗುತ್ತಿಗೆದಾರರನ್ನು ಗುರುತಿಸಿ, ಮಾತುಕತೆ ಸಹ ನಡೆದಿದ್ದು, ಟೆಂಡರ್ ಪ್ರಕ್ರಿಯೆಯಷ್ಟೇ ಬಾಕಿ ಉಳಿದಿದೆ. 50 ಕೋಟಿಗಿಂತ ಹೆಚ್ಚಿನ ಮೊತ್ತದ ಟೆಂಡರ್ಗೆ ಹಣಕಾಸು ಇಲಾಖೆಯ ಅನುಮೋದನೆ ಬೇಕಾಗಿದ್ದು, ಈ ಸಂಬಂಧ ಕಡತವನ್ನು ಹಣಕಾಸು ಇಲಾಖೆಗೆ ಕಳುಹಿಸಲಾಗಿದೆ. ಅನುಮೋದನೆ ದೊರೆಯುತ್ತಲೇ ಟೆಂಡರ್ ಪೂರ್ಣಗೊಳಿಸಿ ತ್ಯಾಜ್ಯ ವಿಲೇವಾರಿ ಕಾರ್ಯ ಆರಂಭಿಸಲಾಗುವುದು ಎಂದು ಪೀಠಕ್ಕೆ ಭರವಸೆ ನೀಡಿದರು.











