ಬೆಳ್ತಂಗಡಿ: ಸೌಜನ್ಯ ಪರ ಹಾಕಿದ್ದ ಬ್ಯಾನರ್ ತೆರವಿಗೆ ಆದೇಶ..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 07. ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣದಲ್ಲಿ ಸಂತ್ರಸ್ತೆಗೆ ನ್ಯಾಯ ಸಿಗಬೇಕು ಎಂದು ಹಾಕಿರುವ ಬ್ಯಾನರ್‌ ಗಳ ತೆರವಿಗೆ ಬೆಳ್ತಂಗಡಿ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆದೇಶ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಜ್ಞಾವಂತ ನಾಗರಿಕರು, ಬೆಳ್ತಂಗಡಿ ಎಂಬ ಹೆಸರಿನಲ್ಲಿ ತಾಲೂಕಿನಾದ್ಯಂತ ಹಾಕಲಾದ ಸೌಜನ್ಯ ಪರ ಬ್ಯಾನರ್ ತೆರವು ಮಾಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು‌ ನೀಡಲಾಗಿತ್ತು. ಈ ದೂರಿನಲ್ಲಿ ಕು. ಸೌಜನ್ಯ ಪ್ರಕರಣದ ತೀರ್ಪನ್ನು ಬಹಿರಂಗವಾಗಿ ಟೀಕಿಸುತ್ತಿದ್ದಾರೆ. ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕದಡುವ ನಿಟ್ಟಿನಲ್ಲಿ, ಯಾರು ಯಾರನ್ನೋ ಆರೋಪಿತರನ್ನಾಗಿ ಬಿಂಬಿಸಿಕೊಂಡು ಧರ್ಮ ಧರ್ಮಗಳ ನಡುವೆ ಒಡಕು ಉಂಟು ಮಾಡಲಾಗುತ್ತಿದೆ. ಇದರಿಂದ ಸಮಾಜದಲ್ಲಿ ಅಶಾಂತಿ ಉಂಟಾಗಿ, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಹೆಚ್ಚಿರುತ್ತದೆ. ಆದುದರಿಂದ ಸಾರ್ವಜನಿಕ ಸ್ಥಳಗಳಲ್ಲಿ, ರಸ್ತೆ ಬದಿಗಳಲ್ಲಿ ಅನಧಿಕೃತವಾಗಿ ಕಾನೂನುಬಾಹಿರವಾಗಿ ಅಳವಡಿಸಿರುವ ಸೌಜನ್ಯ ಪ್ರಕರಣಗಳಿಗೆ ಸಂಬಂಧಿಸಿದ ಪ್ಲೆಕ್ಸ್ ಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ದ‌.ಕ ಜಿಲ್ಲಾ ಎಸ್ಪಿಗೆ ದೂರು ಸಲ್ಲಿಸಲಾಗಿತ್ತು. ಅದರನ್ವಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್ ಪತ್ರ ಬರೆದು ಸೂಚನೆ ನೀಡಿದ ಹಿನ್ನೆಲೆ ಬೆಳ್ತಂಗಡಿ ತಾಲೂಕು ಪಿಡಿಓಗಳಿಗೆ ಬ್ಯಾನರ್ ತೆರವು ಮಾಡುವಂತೆ ಆದೇಶ ಹೊರಡಿಸಲಾಗಿದೆ.

Scroll to Top