ಮಾಣಿ-ಮೈಸೂರು ಹೆದ್ದಾರಿಯಲ್ಲಿ ಕೆಎಸ್ಸಾರ್ಟಿಸಿ ಬಸ್ ಗಳ ಮುಖಾಮುಖಿ ಢಿಕ್ಕಿ ► ಚಾಲಕರಿಬ್ಬರು ಮೃತ್ಯು, 20 ಕ್ಕೂ ಅಧಿಕ ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಮಡಿಕೇರಿ, ಫೆ.08. ಕೆಎಸ್ಸಾರ್ಟಿಸಿ ಬಸ್ ಗಳೆರಡರ ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಎರಡೂ ವಾಹನಗಳ ಚಾಲಕರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 275 ರ ಸುಂಟಿಕೊಪ್ಪ ಸಮೀಪದ ಶಾಂತಿಗಿರಿ ಎಂಬಲ್ಲಿ ಗುರುವಾರದಂದು ನಡೆದಿದೆ.

ಮೃತ ಚಾಲಕರನ್ನು ಪಾಲಾಕ್ಷ ಹಾಗೂ ಷರೀಪ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಓರ್ವ ಪ್ರಯಾಣಿಕನ ಸ್ಥಿತಿ ಗಂಭೀರವಾಗಿದ್ದು, 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಮಡಿಕೇರಿಯಿಂದ ಕುಶಾಲನಗರ ಮಾರ್ಗವಾಗಿ ಹಾಸನಕ್ಕೆ ತೆರಳುತ್ತಿದ್ದ ಬಸ್ ಹಾಗೂ ಮೈಸೂರಿನಿಂದ ಕುಶಾಲನಗರ ಮಾರ್ಗವಾಗಿ ಮಡಿಕೇರಿಗೆ ಬರುತ್ತಿದ್ದ ಬಸ್ ನಡುವೆ ರಾಷ್ಟ್ರೀಯ ಹೆದ್ದಾರಿ 275ರ ಶಾಂತಿಗಿರಿ ಬಳಿಯ ತಿರುವಿನಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಎರಡು ಬಸ್ ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಇದರಿಂದ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಗಾಯಾಳುಗಳನ್ನು ಅಂಬ್ಯುಲೆನ್ಸ್ ಸೇರಿದಂತೆ ಕಾರು, ಬಸ್ ಆಟೋಗಳಲ್ಲಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!

Join the Group

Join WhatsApp Group