(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 26. ರಾಜ್ಯದಾದ್ಯಂತ ಕಾವೇರಿ ಕಿಚ್ಚು ಏರುತ್ತಿದ್ದು, ಕಾವೇರಿ ನೀರು ಉಳಿವಿಗಾಗಿ ನಡೆಯುತ್ತಿರುವ ಬೆಂಗಳೂರು ಬಂದ್ಗೆ ಜೆಡಿಎಸ್ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ. ಬಂದ್ನಲ್ಲಿ ಜೆಡಿಎಸ್ ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ‘ಎಕ್ಸ್’ ಮೂಲಕ ಟ್ವೀಟ್ ಮಾಡಿರುವ ಅವರು, ಕಾವೇರಿ ನೀರಿಗಾಗಿ ನಡೆಯುತ್ತಿರುವ ಬಂದ್ಗೆ ನನ್ನ ಪೂರ್ಣ ಬೆಂಬಲವಿದೆ. ಹೋರಾಟಗಾರರು ಶಾಂತಿಯುತವಾಗಿ ವರ್ತಿಸಬೇಕು. ಬಂದ್ ಯಶಸ್ವಿಯಾಗಲು ಜೆಡಿಎಸ್ ಕಾರ್ಯಕರ್ತರು ಕೂಡ ಸಹಕಾರ ನೀಡಲಿದ್ದಾರೆ ಎಂದು ಬರೆದುಕೊಂಡಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ವಿವಿಧ ಸಂಘಟನೆಗಳು ನೀಡಿರುವ ಬಂದ್ ಕರೆಗೆ ಬೆಂಬಲ ವ್ಯಕ್ತಪಡಿಸಿ ಜೆಡಿಎಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಜೆಡಿಎಸ್ ಕೇಂದ್ರ ಕಚೇರಿ ಜೆ.ಪಿ.ಭವನದಿಂದ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡು ರಾಜ್ಯಸರ್ಕಾರದ ವಿರುದ್ಧ ಘೋಷಣೆ ಕೂಗಿದರು.









