(ನ್ಯೂಸ್ ಕಡಬ)newskadaba.com, ಅ. 29 ಬೆಂಗಳೂರು: ಪಟಾಕಿ ಸಿಡಿಸುವುದು ನಮ್ಮ ಸಂಸ್ಕೃತಿ ಮಾತ್ರವಲ್ಲ, ನಮ್ಮ ಜನರ ಜೀವನಕ್ಕೆ ಆಧಾರ, ನಮ್ಮ ಶಿವಕಾಶಿ ಜನರ ಒಟ್ಟಾರೆ ಆರ್ಥಿಕತೆ. ನಮ್ಮ ಸಂತೋಷಕ್ಕಾಗಿ ಪಟಾಕಿಗಳನ್ನು ತಯಾರಿಸುವ ಕಾರ್ಮಿಕರ ಜೀವನೋಪಾಯಕ್ಕಾಗಿ ನಾವೆಲ್ಲರೂ ನಮ್ಮಿಂದ ಸಾಧ್ಯವಾದಷ್ಟು ಪಟಾಕಿಗಳನ್ನು ಖರೀದಿಸಿ ಸಿಡಿಸಬೇಕು ಎಂದು ಬಿಜೆಪಿ ನಾಯಕ ಕೆ.ಅಣ್ಣಾಮಲೈ ವಿನಂತಿಸಿಕೊಂಡಿದ್ದಾರೆ.

ವಾತಾವರಣಕ್ಕೆ ಇಂಗಾಲ ಹೊರಸೂಸುವಿಕೆಯಲ್ಲಿ ಭಾರತ 125ನೇ ಸ್ಥಾನದಲ್ಲಿದೆ, ಯುಎಸ್ 16 ಮತ್ತು ಚೀನಾ 25ನೇ ಸ್ಥಾನದಲ್ಲಿವೆ. ಆದರೆ ನಾವು ಕೇವಲ ಒಂದು ದಿನ ಪಟಾಕಿ ಸಿಡಿಸುವುದನ್ನು ಪ್ರಮುಖ ವಿಷಯವಾಗಿ ಚರ್ಚಿಸುತ್ತಿದ್ದೇವೆ. ಸುಮಾರು 8 ಲಕ್ಷ ಜನ ನೇರವಾಗಿ ಮತ್ತು ಪರೋಕ್ಷವಾಗಿ ಪಟಾಕಿ ಉದ್ಯಮದೊಂದಿಗೆ ಸಂಪರ್ಕ ಹೊಂದಿದ್ದಾರೆ. ಅವರು ನಮ್ಮ ಸಂತೋಷಕ್ಕಾಗಿ ಸಾಕಷ್ಟು ಸವಾಲುಗಳ ನಡುವೆ ಪಟಾಕಿಗಳನ್ನು ತಯಾರಿಸುತ್ತಾರೆ. ನಾವು ಅವರ ಸಂತೋಷಕ್ಕಾಗಿ ಪಟಾಕಿಗಳನ್ನು ಖರೀದಿಸಿ ಏಕೆ ಸಿಡಿಸಬಾರದು ಎಂದು ಪ್ರಶ್ನಿಸಿದ್ದಾರೆ. ಒಂದು ದಿನ ಪಟಾಕಿಗಳನ್ನು ಹಚ್ಚುವುದರಿಂದ ಏನೂ ಆಗುವುದಿಲ್ಲ. ಇದರಿಂದ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಮಾರಾಟದ ಮೂಲಕ ಸಾಲ ತೀರಿಸುವ ಕನಸು ಕಾಣುತ್ತಿರುವ ಲಕ್ಷಾಂತರ ಸಣ್ಣ ವ್ಯಾಪಾರಿಗಳ ಕನಸು ನನಸಾಗುತ್ತದೆ ಎಂದು ಹೇಳಿದ್ದಾರೆ.
















